09/06/2026
Mandya📍
ಜೆಡಿಎಸ್ -ಬಿಜೆಪಿ ಮೈತ್ರಿಯಲ್ಲಿ ಬಿರುಕು ಸೃಷ್ಟಿಸಲು ಕಾಂಗ್ರೆಸ್ ಷಡ್ಯಂತ್ರ
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಕಾಂಗ್ರೆಸ್ ನಾಯಕರಿಗೆ ದೇವೇಗೌಡರ ಮೇಲೆ ಎಲ್ಲಿಲ್ಲದ ಅನುಕಂಪ ಬಂದಿದೆ ಎಂದು ಕಟುಟೀಕೆ
ರಾಜ್ಯಸಭೆಗೆ ಹೋಗಬೇಕೆಂದು ದೇವೇಗೌಡರು ಅರ್ಜಿ ಹಾಕಿರಲಿಲ್ಲ ಎಂದು ಸ್ಪಷ್ಟನೆ
ನಾನೇನು ಹರಿದಿಲ್ಲ, ಸಿಎಂ ನನ್ನ ಬಳಿ ಬಂದು ಏನು ಸಲಹೆ ಕೇಳುತ್ತಾರೆ ಎಂದ ಹೆಚ್ಡಿಕೆ
ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರ ಹೆಚ್ ಡಿ ದೇವೇಗೌಡ H D Devegowda ಮೇಲೆ ಕಾಂಗ್ರೆಸ್ ನಾಯಕರಿಗೆ ಅತಿಯಾದ ಅನುಕಂಪ ಬಂದಿದೆ. ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿಯಲ್ಲಿ ಬಿರುಕು ಸೃಷ್ಟಿಸಲು ಆ ಪಕ್ಷದ ಅನುಕಂಪದ ಅಸ್ತ್ರ ಪ್ರಯೋಗಿಸುತ್ತಿದೆ ಎಂದು ಕೇಂದ್ರ ಸಚಿವರು ಹಾಗೂ ಜೆಡಿಎಸ್ ರಾಜ್ಯ ಅಧ್ಯಕ್ಷರಾದ ಹೆಚ್.ಡಿ. ಕುಮಾರಸ್ವಾಮಿ H D Kumaraswamy ಅವರು ಕಟುವಾಗಿ ಟೀಕಿಸಿದರು.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ವಿಧಾನಸಭೆ ಕ್ಷೇತ್ರದ ತಗ್ಗಹಳ್ಳಿ ಗ್ರಾಮದಲ್ಲಿ ಸಿಎಸ್ಆರ್ ನಿಧಿ ಅನುದಾನದಿಂದ ನೂತನವಾಗಿ ನಿರ್ಮಾಣಗೊಂಡಿರುವ ಶಾಲಾ ಕೊಠಡಿಗಳನ್ನು ಉದ್ಘಾಟಿಸಿದ ನಂತರ ಕೇಂದ್ರ ಸಚಿವರು ಮಾಧ್ಯಮಗಳ ಜೊತೆ ಮಾತನಾಡಿದರು.
ರಾಜ್ಯಸಭೆ ಟಿಕೆಟ್ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ಅನಗತ್ಯವಾಗಿ ಮಾತನಾಡುತ್ತಿದ್ದಾರೆ. ದೇವೇಗೌಡರ ಬಗ್ಗೆ ಎಲ್ಲಿಲ್ಲದ ಅನುಕಂಪ ಬಂದಿದೆ. ಬಿಜೆಪಿ, ಜೆಡಿಎಸ್ ಮೈತ್ರಿಯಲ್ಲಿ ಬಿರುಕು ತರಲು ಕಾಂಗ್ರೆಸ್ ವಿಫಲ ಪ್ರಯತ್ನ ನಡೆಸುತ್ತಿದೆ. ರಾಜ್ಯಸಭೆ ಟಿಕೆಟ್ಗೆ ದೇವೇಗೌಡರು ಅರ್ಜಿಯೇ ಹಾಕಿಲ್ಲ ಎಂದು ಕುಮಾರಸ್ವಾಮಿ ಅವರು ಸ್ಪಷ್ಟಪಡಿಸಿದರು.
ತನ್ನಲ್ಲಿ ಆಗುತ್ತಿರುವ ಬೆಳವಣಿಗೆಗಳು ಮತ್ತು ವೈಫಲ್ಯಗಳನ್ನು ಮುಚ್ಚಿಟ್ಟುಕೊಳ್ಳಲು ಕಾಂಗ್ರೆಸ್ ಪಕ್ಷವು ದೇವೇಗೌಡರನ್ನು ನೆಪ ಮಾಡಿಕೊಂಡು ರಾಜಕೀಯ ಮಾಡುತ್ತಿದೆ ಎಂದು ಕಿಡಿಕಾರಿದ ಕೇಂದ್ರ ಸಚಿವರು; ದೇವೇಗೌಡರದು ಹೋರಾಟದ ಬುದಕು. ಅಧಿಕಾರಕ್ಕಾಗಿ ಹಪಾಹಪಿಸಿದವರಲ್ಲ. ಸ್ವಾಭಿಮಾನಕ್ಕೆ ಧಕ್ಕೆಯಾದಾಗ ಪ್ರಧಾನಿ ಸ್ಥಾನವನ್ನೇ ಬಿಟ್ಟು ಬಂದರು ಅವರು. ಅದೆಲ್ಲವೂ ಕಾಂಗ್ರೆಸ್ ಪಕ್ಷಕ್ಕೆ ಗೊತ್ತಿಲ್ಲವೇ ಎಂದು ತೀಕ್ಷ್ಣವಾಗಿ ಪ್ರಶ್ನಿಸಿದರು.
ಕಳೆದ ಬಾರಿ ದೇವೇಗೌಡರ ಅವಿರೋಧ ಆಯ್ಕೆಗೆ ಕಾಂಗ್ರೆಸ್ ಬೆಂಬಲದ ಬಗ್ಗೆಯೂ ಮಾತನಾಡಿದ ಕುಮಾರಸ್ವಾಮಿ ಅವರು, ಆಗ ದೇವೇಗೌಡರ ವಿರುದ್ಧ ಇನ್ನೊಬ್ಬ ಅಭ್ಯರ್ಥಿ ನಿಲ್ಲುವ ಅವಕಾಶ ಇರಲಿಲ್ಲ. ಆ ಸಂದರ್ಭದಲ್ಲಿ ಯಾವುದೇ ಪಕ್ಷಕ್ಕೆ ತನ್ನ ಅಭ್ಯರ್ಥಿಯನ್ನು ನಿಲ್ಲಿಸಿ ಗೆಲ್ಲಿಸಿಕೊಳ್ಳುವಷ್ಟು ಸಂಖ್ಯಾಬಲ ಇರಲಿಲ್ಲ. ನಮ್ಮ ಪಕ್ಷಕ್ಕೆ ಸಂಖ್ಯಾಬಲ ಇತ್ತು, ಹೀಗಾಗಿ ರಾಜ್ಯಸಭೆಗೆ ದೇವೇಗೌಡರು ಆಯ್ಕೆಯಾದರು. ಅವರು ಕಾಂಗ್ರೆಸ್ ಬೆಂಬಲದಿಂದ ರಾಜ್ಯಸಭೆಗೆ ಹೋಗಲಿಲ್ಲ ಎಂದು ಅವರು ಹೇಳಿದರು.
ರಾಜ್ಯದಲ್ಲಿ ಒಕ್ಕಲಿಗ ಮುಖ್ಯಮಂತ್ರಿ ಇರಬೇಕಾದರೆ ರಾಜ್ಯಸಭೆ ತಗೊಂಡು ಏನ್ಮಾಡ್ತೀರಾ? ಎರಡು ತಿಂಗಳು ಕಾದು ನೋಡೋಣ, ಅವರೇನು ಮಾಡುತ್ತಾರೆ ಎಂಬುದನ್ನು ಗಮನವಿಟ್ಟು ನೋಡೋಣ ಎಂದ ಸಚಿವರು. ಡಿಕೆಶಿ ಮುಖ್ಯಮಂತ್ರಿ ಆಗುತ್ತಿರುವ ಹಿನ್ನೆಲೆಯಲ್ಲಿ ದೇವೇಗೌಡರ ಮನೆಯಲ್ಲಿ ಸೂತಕ ಆವರಿಸಿದೆ ಎಂದಿದ್ದ ಮಾಜಿ ಮಂತ್ರಿಯೊಬ್ಬರ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ಸ್ಪಷ್ಟವಾಗಿ ನಿರಾಕರಿಸಿದರು.
ನಾನೇನು ಹರಿದಿಲ್ಲ, ಸಿಎಂ ಬಂದು ನನ್ನ ಬಳಿ ಏನು ಸಲಹೆ ಕೇಳುತ್ತಾರೆ?:
ತಮ್ಮ ನಿವಾಸಕ್ಕೆ ರಾಜ್ಯದ ಮುಖ್ಯಮಂತ್ರಿ ಭೇಟಿ ನೀಡುತ್ತಾರಂತಲ್ಲ, ಕುಮಾರಸ್ವಾಮಿ ಅವರ ಸಲಹೆ ಕೇಳುವುದಾಗಿ ಹೇಳಿದ್ದಾರೆ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ತೀಕ್ಷ್ಣವಾಗಿ ಉತ್ತರಿಸಿದ ಕೇಂದ್ರ ಸಚಿವರು, ನಾನೇನು ಸಲಹೆ ನೀಡಲಿ, ಕುಮಾರಸ್ವಾಮಿ ಎರಡು ಬಾರಿ ಮುಖ್ಯಮಂತ್ರಿ ಆಗಿ ಏನು ಹರಿದಿದ್ದಾರೆ ಎಂದು ಹೇಳಿದ್ದಾರೆ. ಎಲ್ಲದಕ್ಕೂ ಸಾಕ್ಷಿ ಗುಡ್ಡೇ ಕೇಳುತ್ತಾರೆ. ನಾನೇನು ಹರಿದಿಲ್ಲ, ನನ್ನ ಬಳಿ ಬಂದು ಏನು ಸಲಹೆ ಕೇಳುತ್ತಾರೆ ಅವರು. ಎಲ್ಲವನ್ನು ನಾನು ಬಲ್ಲೆ. ಹಿರಿಯರು ಒಂದು ಮಾತು ಹೇಳಿದ್ದಾರೆ, 'ಅತಿ ವಿನಯಂ ದೂರ್ತ ಲಕ್ಷಣಂ' ಅಂತ. ಆ ಮಾತು ನನಗೆ ಪದೇಪದೇ ನೆನಪಿಗೆ ಬರುತ್ತಿದೆ ಎಂದು ಕುಟುಕಿದರು.
ವಿಧಾನ ಪರಿಷತ್ ಚುನಾವಣೆಗೆ ಜೆಡಿಎಸ್ ಪಕ್ಷ ಅಭ್ಯರ್ಥಿ ಹಾಕಿರುವ ವಿಚಾರದ ಕೇಳಿದ ಪ್ರಶ್ನೆಗೆ ಉತ್ತರಿಸಿದ ಕುಮಾರಸ್ವಾಮಿ ಅವರು; ನಮಗೂ ಎರಡು ಮತ ಬೇಕು, ಕಾಂಗ್ರೆಸ್ ಪಕ್ಷಕ್ಕೂ ಎರಡು ಮತ ಬೇಕು. ಇದರಲ್ಲಿ ಯಾವುದೇ ಗೇಮ್ ಪ್ಲಾನ್ ಇಲ್ಲ. ನಾವು ಬಿಜೆಪಿಯಿಂದ ಉಚ್ಚಾಟನೆಯಾಗಿರುವ ಬಸನಗೌಡ ಪಾಟೀಲ ಯತ್ನಾಳ್ ಅವರನ್ನು ಮತ ಹಾಕುವಂತೆ ಕೇಳುತ್ತೇವೆ. ನಮ್ಮ ಪ್ರಯತ್ನ ನಾವು ಮಾಡುತ್ತೇವೆ. ಕಾಂಗ್ರೆಸ್ ನವರಿಗೆ ಹಣ ಬಲ, ಅಧಿಕಾರ ಬಲ ಇದೆ. ಮುಂದೆ ನೋಡೋಣ ಏನಾಗುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ, ಕೆಆರ್ ಪೇಟೆ ಶಾಸಕ ಮಂಜುನಾಥ, ಜಿಲ್ಲಾ ಜೆಡಿಎಸ್ ಅಧ್ಯಕ್ಷ ರಮೇಶ್ ಇನ್ನೂ ಹಲವು ಮುಖಂಡರು ಹಾಜರಿದ್ದರು.